Bengaluru: ಬೆಂಗಳೂರಿನ ಕೆಲವು ಹೋಟೆಲ್ (restaurants) ಹಾಗೂ ಉಪಾಹಾರ ಕೇಂದ್ರಗಳಲ್ಲಿ ಇಡ್ಲಿ ತಯಾರಿಸಲು ಪ್ಲಾಸ್ಟಿಕ್ (Plastic) ಹಾಳೆಗಳನ್ನು ಬಳಸಲಾಗುತ್ತಿದ್ದು, ಇದರ ಪರಿಣಾಮವಾಗಿ ಗ್ರಾಹಕರ ಆರೋಗ್ಯಕ್ಕೆ ಹಾನಿಯಾಗುತ್ತಿರುವುದು ಬೆಳಕಿಗೆ ಬಂದಿದೆ. ಆಹಾರ ಇಲಾಖೆಯ ಪರೀಕ್ಷೆಯಲ್ಲಿ 51% ಇಡ್ಲಿ ಮಾದರಿಗಳು ಅಸುರಕ್ಷಿತವೆಂದು ದೃಢಪಟ್ಟ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಕುರಿತು ಗಂಭೀರ ಕ್ರಮ ಕೈಗೊಂಡಿದೆ.
ರಾಜ್ಯದ ಎಲ್ಲಾ ಹೋಟೆಲ್ ಮತ್ತು ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ. ಹೋಟೆಲ್, ರಸ್ತೆಬದಿ ತಿಂಡಿ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್ ಬಳಸುವಂತಿಲ್ಲ. ಆಹಾರ ತಯಾರಿಕೆ ಮತ್ತು ವಿತರಣೆ ವೇಳೆ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಲ್ಲಿಸಬೇಕು ಎಂದು ಅವರು ಹೇಳಿದ್ದಾರೆ.
251 ತಿಂಡಿ ಹೋಟೆಲ್ ಮತ್ತು ಅಂಗಡಿಗಳಿಂದ ಮಾದರಿಗಳನ್ನು ಸಂಗ್ರಹಿಸಲಾಗಿತ್ತು. ಅವುಗಳಲ್ಲಿ 51 ಮಾದರಿಗಳು ಅಸುರಕ್ಷಿತವೆಂದು ಪತ್ತೆಯಾಗಿದೆ. ಪ್ಲಾಸ್ಟಿಕ್ ಬಳಕೆಯಿಂದ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಮಿಶ್ರಣವಾಗುತ್ತಿದೆ. ಇದು ಕ್ಯಾನ್ಸರ್ಗೆ ಕಾರಣವಾಗಬಹುದು ಎಂಬ ತಜ್ಞರ ಎಚ್ಚರಿಕೆಯನ್ನು ಸಚಿವರು ಉಲ್ಲೇಖಿಸಿದ್ದಾರೆ.
ಇದಕ್ಕೂ ಮುಂಚೆ ಹೋಟೆಲ್ ಗಳಲ್ಲಿ ಹತ್ತಿ ಬಟ್ಟೆ ಬಳಸಲಾಗುತ್ತಿತ್ತು. ಆದರೆ ಇತ್ತೀಚೆಗೆ ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದ್ದು, ಶಾಖಕ್ಕೆ ಒಡ್ಡಿದಾಗ ಹಾನಿಕಾರಕ ರಾಸಾಯನಿಕ ವಸ್ತುಗಳು ಬಿಡುಗಡೆಯಾಗುತ್ತವೆ. ಬೆಂಗಳೂರಿನ ಅನೇಕ ಹೋಟೆಲ್ಗಳಲ್ಲಿ ತಯಾರಾದ ಇಡ್ಲಿ ಅಸುರಕ್ಷಿತವೆಂಬುದಾಗಿ ಪತ್ತೆಯಾದ ಬೆನ್ನಲ್ಲೇ ಸರ್ಕಾರ ತಕ್ಷಣವೇ ಕ್ರಮ ಕೈಗೊಂಡಿದೆ.
ಆರೋಗ್ಯ ಇಲಾಖೆಯ ಅಧಿಕೃತ ವರದಿಯಂತೆ 50% ಮಾದರಿಗಳಲ್ಲಿ ಕಾರ್ಸಿನೋಜೆನಿಕ್ ಅಂಶ ಪತ್ತೆಯಾಗಿದೆ. ಉಳಿದ ಮಾದರಿಗಳ ಪರೀಕ್ಷಾ ವರದಿ ಇನ್ನೂ ಬಾಕಿಯಿದೆ. ಈ ಹಿನ್ನೆಲೆ, ಸರ್ಕಾರ ರಾಜ್ಯದ ಎಲ್ಲಾ ಹೋಟೆಲ್ ಮತ್ತು ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿ ಮಾಡಲಿದೆ.