Chennai: ಲೋಕಸಭೆಯಲ್ಲಿ ಅಂಗೀಕಾರವಾಗಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು (Waqf Amendment Bill) ಸುಪ್ರೀಂ ಕೋರ್ಟ್ ನಲ್ಲಿ (Supreme Court) ಪ್ರಶ್ನಿಸುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ.
ಮಸೂದೆಗೆ ವಿರೋಧ ವ್ಯಕ್ತಪಡಿಸಿರುವ ಅವರು ಇಂದು ಕಪ್ಪು ಪಟ್ಟಿ ಧರಿಸಿ ತಮಿಳುನಾಡು ವಿಧಾನಸಭೆಗೆ ಹಾಜರಾದರು. ಕೆಲವು ಮಿತ್ರ ಪಕ್ಷಗಳ ಬೆಂಬಲದಿಂದ ತಿದ್ದುಪಡಿ ಮಸೂದೆ ಅಂಗೀಕರಿಸಿರುವುದು ಸಂವಿಧಾನದ ಮೇಲೆ ದಾಳಿ ಎಂದು ಟೀಕಿಸಿದ್ದಾರೆ.
ಈ ತಿದ್ದುಪಡಿ ಧಾರ್ಮಿಕ ಸಾಮರಸ್ಯವನ್ನು ಕದಡುವುದಾಗಿ ಅವರು ಹೇಳಿದ್ದಾರೆ. ಇದನ್ನು ವಿರೋಧಿಸುವುದಾಗಿ ತಮಿಳುನಾಡು ವಿಧಾನಸಭೆ ಮಾರ್ಚ್ 27ರಂದು ನಿರ್ಣಯ ಕೈಗೊಂಡಿತ್ತು.
ಡಿಎಂಕೆ ಸರ್ಕಾರ ಈ ವಿವಾದಾತ್ಮಕ ತಿದ್ದುಪಡಿಯನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲಿದೆ. ಕೇಂದ್ರ ಸರ್ಕಾರ ಅಲ್ಪಸಂಖ್ಯಾತ ಮುಸ್ಲಿಮರನ್ನು ಬೆದರಿಸುತ್ತಿದೆ ಎಂದು ಅವರು ಆರೋಪಿಸಿದರು. ಡಿಎಂಕೆ ಸದಸ್ಯರು ಅವರ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿಗೆ ಬರೆದ ಪತ್ರದಲ್ಲಿ, ವಕ್ಫ್ (ತಿದ್ದುಪಡಿ) ಮಸೂದೆ 2024 ಅನ್ನು ಸಂಪೂರ್ಣವಾಗಿ ಹಿಂಪಡೆಯಬೇಕೆಂದು ಸಿಎಂ ಸ್ಟಾಲಿನ್ ಒತ್ತಾಯಿಸಿದ್ದಾರೆ.








