
ಮಾಜಿ ಅಬಕಾರಿ ಸಚಿವ ಮತ್ತು ಹಾನಗಲ್ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಮನೋಹರ್ ತಹಶೀಲ್ದಾರ್ (80) (Manohar Tehsildar) ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು.
ಮನೋಹರ್ ತಹಶೀಲ್ದಾರ್ ಅವರು ಬೆಂಗಳೂರಿನ ಚಾಮರಾಜ ಪೇಟೆಯ ಶಂಕರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ (ನ.20) ಮಧ್ಯರಾತ್ರಿ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು ಎಳೆದಿದ್ದಾರೆ.
ಮೃತರಿಗೆ ನಾಲ್ಕು ಪುತ್ರರು ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಅವರ ಅಂತ್ಯಕ್ರಿಯೆ ಶುಕ್ರವಾರ ಹುಟ್ಟೂರಾದ ಅಕ್ಕಿವಳ್ಳಿಯಲ್ಲಿ ನಡೆಯಲಿದೆ.
ಮನೋಹರ್ ತಹಶೀಲ್ದಾರ್ ಅವರು ಕಾಂಗ್ರೆಸ್, JDS, ಮತ್ತು BJP ಪಕ್ಷಗಳಲ್ಲಿ ಸೇವೆ ಸಲ್ಲಿಸಿದ್ದರು. 2015ರಲ್ಲಿ ಅವರು ಕಾಂಗ್ರೆಸ್ ಸರ್ಕಾರದಲ್ಲಿ ಅಬಕಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಆದರೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದರು. ನಂತರ ಅವರು ಬಿಜೆಪಿ ಪಕ್ಷಕ್ಕೆ ಸೇರಿದ್ದರು.
ಮೃತದೇಹವನ್ನು ಹಾನಗಲ್ NCJC ಮಹಾವಿದ್ಯಾಲಯದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿದೆ. ಹಾವೇರಿ ಜಿಲ್ಲೆಯ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೆಲ ದಿನಗಳ ಹಿಂದಷ್ಟೇ ಶಂಕರ್ ಆಸ್ಪತ್ರೆಗೆ ಭೇಟಿ ನೀಡಿ, ಮನೋಹರ್ ತಹಶೀಲ್ದಾರ್ ಅವರ ಆರೋಗ್ಯ ವಿಚಾರಿಸಿದ್ದರು.
ಅಕ್ಕಿವಳ್ಳಿಯಲ್ಲಿನ ತಮ್ಮ ಸ್ವಂತ ಜಮೀನಿನಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.