ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆಯುತ್ತಿರುವ ಹೇಮಾವತಿ ಎಕ್ಸ್ಪ್ರೆಸ್ ಕೆನಾಲ್ (Hemavati Link Canal) ಕಾಮಗಾರಿಗೆ ವಿರೋಧವಾಗಿ ಹೋರಾಟ ನಡೆಸಿದ ಹಿನ್ನಲೆಯಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕಾಮಗಾರಿ ನಡೆದ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಅದನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಹೋರಾಟಗಾರರ ವಿರುದ್ಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ 100ಕ್ಕೂ ಹೆಚ್ಚು ಜನರ ವಿರುದ್ಧ FIR ದಾಖಲಾಗಿದೆ.
ಬಂಧಿತರಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ನವಚೇತನ್, ಚೇತನ್ ಬೊಮ್ಮರನಹಳ್ಳಿ, ಬೆಣಚಗೆರೆ ಲೋಕಿ ಮತ್ತು ಕೌಶಿಕ್ ಸೇರಿದ್ದಾರೆ. ಇವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಈ ಪ್ರತಿಭಟನೆಯ ವೇಳೆ ಸರಕಾರಿಗೆ ಹಾಗೂ ಖಾಸಗಿ ಆಸ್ತಿಗಳಿಗೆ ಹಾನಿಯಾಗಿದೆ ಎಂಬ ದೂರಿನ ಆಧಾರದ ಮೇಲೆ, ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ದೂರು ಪ್ರಕಾರ ಸುಮಾರು ₹34.65 ಲಕ್ಷ ಮೌಲ್ಯದ ಆಸ್ತಿಗೆ ಹಾನಿಯಾಗಿದೆ.
ಎಫ್ಐಆರ್ನಲ್ಲಿ ನಿಷೇಧಾಜ್ಞೆ ಉಲ್ಲಂಘನೆ, ಕೊಲೆಯತ್ನ, ಸರ್ಕಾರಿ ಕೆಲಸಕ್ಕೆ ಅಡ್ಡಿ, ಸರ್ಕಾರಿ ಮತ್ತು ಖಾಸಗಿ ಆಸ್ತಿಗೆ ಹಾನಿ, ಕಲ್ಲು ತೂರಾಟ, ಅಧಿಕಾರಿಗಳ ಮೇಲೆ ಹಲ್ಲೆ ಮೊದಲಾದ ಆರೋಪಗಳನ್ನು ದಾಖಲಿಸಲಾಗಿದೆ.
ಕಾಮಗಾರಿ ನಿಟ್ಟೂರಿನಿಂದ ಆರಂಭವಾಗಿ ಡಿ. ರಾಂಪುರದವರೆಗೂ ನಡೆಯುತ್ತಿದ್ದು, ಈ ಮಾರ್ಗದಲ್ಲಿರುವ ಘಟನೆಗಳ ಬಗ್ಗೆ ಪೊಲೀಸರು ದಾಖಲೆ ಮಾಡಿದ್ದಾರೆ.