
Chikkaballapur : ಆಗಸ್ಟ್ 19ರಂದು ನಡೆಯಲಿರುವ ಸಚಿವ ಸಂಪುಟ ವಿಶೇಷ ಸಭೆಯಲ್ಲಿ ಒಳಮೀಸಲಾತಿ ವಿಚಾರವಾಗಿ ಸರ್ಕಾರ ಅಂತಿಮ ನಿರ್ಧಾರ ಪ್ರಕಟಿಸಬೇಕು ಎಂದು ಆಗ್ರಹಿಸಿ, ಕರ್ನಾಟಕ ಮಾದಿಗ ಮಹಾಸಭಾ (Karnataka Madiga Mahasabha protest) ಹಾಗೂ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಚಿಕ್ಕಬಳ್ಳಾಪುರ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಶಾಸಕ ಪ್ರದೀಪ್ ಈಶ್ವರ್ ಅಧಿವೇಶನದಲ್ಲಿ ಒಳಮೀಸಲಾತಿ ಪರವಾಗಿ ಧ್ವನಿ ಎತ್ತಬೇಕು ಎಂದು ಆಗ್ರಹಿಸಲಾಯಿತು.
ಅಂಬೇಡ್ಕರ್ ಭವನದಿಂದ ಮೆರವಣಿಗೆಯಲ್ಲಿ ಬಂದ ಪ್ರತಿಭಟನಕಾರರನ್ನು ಕಚೇರಿ ಪ್ರವೇಶ ದ್ವಾರದಲ್ಲಿಯೇ ಪೊಲೀಸರು ತಡೆದರು. ಇದರಿಂದ ಅಸಮಾಧಾನಗೊಂಡ ಪ್ರತಿಭಟನಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. “ರಾಜ್ಯದ ಎಲ್ಲ ಕಡೆ ಶಾಸಕರ ಮನೆ ಮುಂದೆ ಚಳವಳಿ ನಡೆದರೂ, ಚಿಕ್ಕಬಳ್ಳಾಪುರದಲ್ಲಿ ಶಾಸಕರ ಮನೇ ಇಲ್ಲ. ಇದು ನಮ್ಮ ಪರಿಸ್ಥಿತಿ” ಎಂದು ದೂರಿದರು.
ಬಾಲಕುಂಟಹಳ್ಳಿ ಗಂಗಾಧರ್ ಮಾತನಾಡಿ, “ಹಿಂದೆ ಒಳಮೀಸಲಾತಿ ಆಗ್ರಹಿಸಿ ಶಾಸಕರ ಮನೆ ಮುಂದೆ ತಮಟೆ ಚಳವಳಿ ನಡೆಸಿದ್ದೆವು. ಆದರೆ ಪ್ರದೀಪ್ ಈಶ್ವರ್ ರಾತ್ರೋರಾತ್ರಿ ಮನೆ ಖಾಲಿ ಮಾಡಿದ್ದಾರೆ. ಈಗ ಶಾಸಕರ ಮನೆಯನ್ನು ನಾವೇ ಹುಡುಕಬೇಕಾಗಿದೆ” ಎಂದು ವ್ಯಂಗ್ಯವಾಡಿ ಜನರಿಗೆ ಸಮಸ್ಯೆಗಳು ಬಂದರೆ ಶಾಸಕರನ್ನು ನೋಡಲು ಬೆಂಗಳೂರಿಗೆ ಹೋಗಬೇಕಾದ ಪರಿಸ್ಥಿತಿ ಬಂದಿದೆ ಎಂದು ಅವರು ಕಿಡಿಕಾರಿದರು.
ಪ್ರತಿಭಟನಕಾರರು, “ಶಾಸಕರು ಅಧಿವೇಶನದಲ್ಲಿ ಒಳಮೀಸಲಾತಿ ಪರವಾಗಿ ಮಾತನಾಡದಿದ್ದರೆ, ಅವರ ಎಲ್ಲಾ ಕಾರ್ಯಕ್ರಮಗಳಿಗೆ ಬಹಿಷ್ಕಾರ ಹಾಕುತ್ತೇವೆ. ಹಳ್ಳಿಗಳಿಗೆ ಬರಲು ಅವಕಾಶ ಕೊಡುವುದಿಲ್ಲ” ಎಂದು ಎಚ್ಚರಿಕೆ ನೀಡಿದರು. ತೆಲಂಗಾಣ ಸೇರಿದಂತೆ ಹಲವಾರು ರಾಜ್ಯಗಳು ಈಗಾಗಲೇ ಒಳಮೀಸಲಾತಿ ಜಾರಿಗೊಳಿಸಿದ್ದರೂ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಸ್ಪಷ್ಟ ನಿಲುವು ತಾಳದಿರುವುದನ್ನು ಖಂಡಿಸಿದರು.
For Daily Updates WhatsApp ‘HI’ to 7406303366
The post ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.







