Bengaluru: ಕರ್ನಾಟಕ ಲೋಕಸೇವಾ ಆಯೋಗ (KPSC)ನಲ್ಲಿ ನಡೆಯುತ್ತಿರುವ ಲೋಪದೋಷಗಳು ಮತ್ತು ಗೊಂದಲಗಳನ್ನು ತೀವ್ರವಾಗಿ ಟೀಕಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (Vijayendra) ಅವರು, ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ನಡವಳಿಕೆಯನ್ನು ಖಂಡಿಸಿದ್ದಾರೆ.
ವಿಜಯೇಂದ್ರ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಾಕಿದ ಪೋಸ್ಟ್ನಲ್ಲಿ, KPSC ಯ ಗೆಜೆಟೆಡ್ ಪ್ರೊಬೆಷನರಿ ಪರೀಕ್ಷೆಗಳಾದ ಪೂರ್ವಭಾವಿ, ಮರುಪರೀಕ್ಷೆ ಮತ್ತು ಮುಖ್ಯ ಪರೀಕ್ಷೆಗಳಲ್ಲಿ ನಡೆದ ಭಾಷಾಂತರದ ತಪ್ಪುಗಳಿಂದ ಸಾವಿರಾರು ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಅನ್ಯಾಯಕ್ಕೆ ಒಳಗಾಗಿದ್ದಾರೆ ಎಂದಿದ್ದಾರೆ.
ಮೇ 5ರಂದು ನಡೆದ ಮುಖ್ಯ ಪರೀಕ್ಷೆಯಲ್ಲಿ ಬೆಂಗಳೂರಿನ ಪರೀಕ್ಷಾ ಕೇಂದ್ರದಲ್ಲಿ, ಪರೀಕ್ಷೆ ಶುರುವಾಗುವ ಮೊದಲು ಪ್ರಶ್ನೆ ಪತ್ರಿಕೆಯ ಬಂಡಲ್ ತೆರೆಯಲ್ಪಟ್ಟಿರುವುದಾಗಿ ವರದಿಯಾಗಿದೆ. ಮೇಲ್ವಿಚಾರಕರೂ ಈ ವಿಷಯ ಒಪ್ಪಿಕೊಂಡಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯ ಅನುಮಾನಕ್ಕೆ ಕಾರಣವಾಗಿದೆ.
ಇಂಥ ಎಡವಟ್ಟುಗಳು ಮುಂದುವರಿದರೆ, ಕೆಪಿಎಸ್ಸಿ ಜನರ ವಿಶ್ವಾಸ ತಪ್ಪಿಸಿ, ಕರ್ನಾಟಕದ ಪ್ರತಿಷ್ಠೆಗೆ ಧಕ್ಕೆ ಉಂಟುಮಾಡುತ್ತಿದೆ. ಆದರೂ ಸರ್ಕಾರ ಈ ಬಗ್ಗೆ ಕಣ್ಣುಮುಚ್ಚಿಕೊಂಡಿರುವುದು ದುಃಖದ ವಿಷಯವೆಂದು ವಿಜಯೇಂದ್ರ ಅವರು ಹೇಳಿದ್ದಾರೆ.
ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಾ, ಈ ವಿಚಾರದಲ್ಲಿ ತಕ್ಷಣ ಉನ್ನತ ಮಟ್ಟದ ತನಿಖೆ ನಡೆಸಿ, ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ವಿದ್ಯಾರ್ಥಿಗಳ ಕೋಪಕ್ಕೆ ಸರ್ಕಾರ ಬೆಲೆ ತೆರಬೇಕಾಗುತ್ತದೆ ಎಂದು ಹೇಳಿದರು.