ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯವಾದ ಗುಜರಾತ್ನಲ್ಲಿ (Gujarat) ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತಕ್ಕೆ ಬಂದಿರುವವರ (Bangladeshi illegal immigrants) ವಿರುದ್ಧ ಭಾರಿ ಕಾರ್ಯಾಚರಣೆ ನಡೆಸಲಾಗಿದೆ. ಪಹಲ್ಗಾಮ್ನಲ್ಲಿ ನಡೆದ ಭೀಕರ ಗುಂಡಿನ ದಾಳಿಯ ಬಳಿಕ ಕೇಂದ್ರ ಸರ್ಕಾರ ಪಾಕಿಸ್ತಾನ ವಿರುದ್ಧ ಹಲವು ನಿರ್ಬಂಧಗಳನ್ನು ಹಾಕಿದ್ದು, ರಾಜ್ಯಗಳಿಗೂ ಕಾರ್ಯಾಚರಣೆ ಮಾಡಲು ಸೂಚನೆ ನೀಡಿತ್ತು.
ಗುಜರಾತ್ ರಾಜ್ಯದಲ್ಲಿ ವಿಶೇಷ ಪೊಲೀಸ್ ತಂಡಗಳು – SOG, DCB, AHTU, PCB ಹಾಗೂ ಸ್ಥಳೀಯ ಪೊಲೀಸರು – ಸೇರಿ ಬೃಹತ್ ತಪಾಸಣಾ ಕಾರ್ಯಾಚರಣೆ ನಡೆಸಿ, ನಕಲಿ ದಾಖಲೆಗಳೊಂದಿಗೆ ಭಾರತದಲ್ಲಿ ವಾಸಿಸುತ್ತಿದ್ದ 550 ಕ್ಕೂ ಹೆಚ್ಚು ಬಾಂಗ್ಲಾದೇಶಿ ವಲಸಿಗರನ್ನು ಬಂಧಿಸಿದ್ದಾರೆ.
ಸೂರತ್ ನಲ್ಲಿ ಮಾತ್ರವೇ 100 ಕ್ಕೂ ಹೆಚ್ಚು ವಲಸಿಗರನ್ನು ರಾತ್ರಿ ವೇಳೆ ಕೂಂಬಿಂಗ್ ಕಾರ್ಯಾಚರಣೆಯ ಮೂಲಕ ಹಿಡಿದಿದ್ದಾರೆ. ಅವರೆಲ್ಲರೂ ನಕಲಿ ದಾಖಲೆಗಳನ್ನು ಹೊಂದಿದ್ದು, ತನಿಖೆ ನಂತರ ಅವರನ್ನು ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಅಹಮದಾಬಾದ್ನಲ್ಲಿಯೂ ಮುಂಜಾನೆ 3 ಗಂಟೆಗೆ ಕಾರ್ಯಾಚರಣೆ ನಡೆಸಿ 450 ಕ್ಕೂ ಹೆಚ್ಚು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಈ ಕಾರ್ಯಚರಣೆಯು ಗೃಹ ಸಚಿವರು, ಪೊಲೀಸ್ ಆಯುಕ್ತರು ಹಾಗೂ ಪೊಲೀಸ್ ಮಹಾನಿರ್ದೇಶಕರ ಸೂಚನೆಯಂತೆ ನಡೆಯುತ್ತಿದೆ.
ಇನ್ನೂ ಏಪ್ರಿಲ್ 2024 ರಿಂದ ಇಲ್ಲಿಯವರೆಗೆ 127 ಬಾಂಗ್ಲಾದೇಶಿ ವಲಸಿಗರನ್ನು ಬಂಧಿಸಿ, 77 ಜನರನ್ನು ಗಡೀಪಾರು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೂ ಇಂಥ ಕಾರ್ಯಾಚರಣೆಗಳು ಮುಂದುವರೆಯಲಿವೆ ಎಂದು ತಿಳಿಸಿದ್ದಾರೆ.