
Bengaluru: ವಿಶ್ವವಿದ್ಯಾಲಯಗಳನ್ನು ಮುಚ್ಚುವ ಕುರಿತು (ಸರ್ಕಾರ) ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದರು.
ಬಿಜೆಪಿ ಸದಸ್ಯರು ಈ ಬಗ್ಗೆ ಸದನದಲ್ಲಿ ಪ್ರಶ್ನೆ ಎತ್ತಿದಾಗ, ಉಪ ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ಉಪ ಸಮಿತಿ ರಚಿಸಲಾಗಿದೆ ಎಂದು ಸಿಎಂ ತಿಳಿಸಿದರು. ಈ ಸಮಿತಿ ವರದಿ ಇನ್ನೂ ಬಂದಿಲ್ಲ, ವರದಿ ಬಂದ ಬಳಿಕ ಮಾತ್ರ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಬಿಜೆಪಿ ಸದಸ್ಯ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಈ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಮನವಿ ಮಾಡಿದರು. ಸ್ಪೀಕರ್ ಯು.ಟಿ.ಖಾದರ್ ಪ್ರತಿದಿನ ಈ ವಿಚಾರಕ್ಕೆ ನಿಲುವಳಿ ಸೂಚನೆ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ನಾಯಕ ಆರ್. ಅಶೋಕ್ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ವಿವಿಗಳನ್ನು ಮುಚ್ಚಬಾರದು ಎಂದು ಒತ್ತಾಯಿಸಿದರು. ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯಿಂದ ಗೊಂದಲ ಉಂಟಾಗಿದೆ, ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಅವರು ಆಗ್ರಹಿಸಿದರು.
ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, “ಕ್ಯಾಬಿನೆಟ್ ಉಪ ಸಮಿತಿ ವರದಿ ಬಂದ ನಂತರವೇ ತೀರ್ಮಾನ ಮಾಡಲಾಗುವುದು” ಎಂದು ಹೇಳಿದರು.